ಕನ್ನಡ ನ್ಯೂಸ್ 24
ರಾಜ್ಯದಲ್ಲಿ ಚುನಾವಣಾ ಕಾರ್ಯಗಳಿಗೆ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುವುದರಿಂದ ಶಾಲಾ ತರಗತಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಅಡಚಣೆಯಾಗುತ್ತಿರುವ ಹಿನ್ನೆಲೆಯಲ್ಲಿ, ಇನ್ನು ಮುಂದೆ ಚುನಾವಣಾ ಕರ್ತವ್ಯಗಳಿಗೆ ಶಾಲಾ ಶಿಕ್ಷಕರ ಬದಲು ಬೇರೆ ಇಲಾಖೆಯ ಅಧಿಕಾರಿಗಳು ಮತ್ತು ಬೋಧಕೇತರ ಸಿಬ್ಬಂದಿಯನ್ನು ನಿಯೋಜಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತಗಟ್ಟೆ ಅಧಿಕಾರಿಗಳಂತಹ ಕಾರ್ಯಗಳಿಗೆ ಶಿಕ್ಷಕರನ್ನು ನೇಮಿಸುವುದರಿಂದ ಶಾಲೆಗಳಲ್ಲಿ ದೈನಂದಿನ ಪಾಠಗಳಿಗೆ ತೊಂದರೆಯಾಗುತ್ತಿದೆ. ಇದು ಮಕ್ಕಳ ಕಲಿಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ರಾಜ್ಯದಲ್ಲಿ ರಜಾ ದಿನಗಳು ಮತ್ತು ಬೋಧನೆ ಇಲ್ಲದ ಸಮಯದಲ್ಲಿ ಮಾತ್ರ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಕೂಡ ಈ ಹಿಂದೆ ಅಭಿಪ್ರಾಯಪಟ್ಟಿತ್ತು.ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಬೋಧಕೇತರ ಹಾಗೂ ಇತರೆ ಇಲಾಖೆಯ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣಾ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಶಾಲಿನಿ ರಜನೀಶ್ ಅವರು ಸಲಹೆ ನೀಡಿದ್ದಾರೆ.
